ಅಂಗದ ಮೇಲಣ ಲಿಂಗವ ಹಿಂಗಿ ಸ್ಥಾವರಲಿಂಗಕ್ಕೆರಗುವ
ಭಂಗಿತರ ಮುಖವ ನೋಡಲಾಗದು.
ಅದೆಂತೆಂದಡೆ;
ತನ್ನ ಗಂಡನ ಬಿಟ್ಟು ಅನ್ಯ ಗಂಡರಿಗೆರಗುವ
ಹಾದರಗಿತ್ತಿಯಂತೆ ಅವಂದಿರ ಭಕ್ತಿ.
ಅಂತಪ್ಪ ಪಂಚಮಹಾಪಾತಕರ
ಮುಖದತ್ತ ತೋರದಿರಾ ಗುಹೇಶ್ವರಾ/15
ಅಂಗದ ಮೇಲೆ ಲಿಂಗವರತು, ಲಿಂಗದ ಮೇಲೆ ಅಂಗವರತು
ಭಾವತುಂಬಿ ಪರಿಣಾಮವರತು,
ನಾಮವಿಲ್ಲದ ದೇವರಿಗೆ ನೇಮವೆಲ್ಲಿಯದೊ ಗುಹೇಶ್ವರಾ./18
ಅಂಗದೊಳಗೆ ಮಹಾಲಿಂಗವಿರಲು,
ಕೈಯ ಲಿಂಗ ಬಿದ್ದಿತ್ತೆಂದು ನೆಲದೊಳಗಂಗವ ಹೂಳಿ
ಭಂಗಪಡುವರಲ್ಲಾ,
ಗುಹೇಶ್ವರಲಿಂಗವನರಿಯದ ಜಡರು./28
ಅಂತರಂಗದೊಳಗಿಲ್ಲ ಬಹಿರಂಗದೊಳಗಿಲ್ಲ
ಮತ್ತಾವ ದೆಶೆ ದಿಕ್ಕಿನೊಳಗೆಯೂ ಇಲ್ಲ.
ಏನಾಯಿತ್ತೆಂದರಿಯೆ ಎಂತಾಯಿತ್ತೆಂದರಿಯೆ
ಅದೆಂತೆಂದರೆ:
“ಅಂತಃ ಶೂನ್ಯಂ ಬಹಿಃಶೂನ್ಯಂ ಶೂನ್ಯಂ ಶೂನ್ಯಂ ದಿಶೌ ದಿಶೌ!
ಸರ್ವಶೂನ್ಯಂ ನಿರಾಲಂಬಂ ನಿದ್ರ್ವಂದ್ವಂ ಪರಮಂ ಪದಂ
ಎಂಬುದಾಗಿ-ಅಲ್ಲಿ ಇಲ್ಲಿ ಎಲ್ಲಿಯೂ ಇಲ್ಲ.
ಗುಹೇಶ್ವರ ಬಯಲು./53
ಅಗ್ನಿಯ ಸುಡುವಲ್ಲಿ ಉದಕವ ತೊಳೆವಲ್ಲಿ
ವಾಯುವ ಮೆಟ್ಟಿ ಆಕಾಶವ ಹಿಡಿವಲ್ಲಿ
ಯೋಗದ ಹೊಲಬ ನೀನೆತ್ತ ಬಲ್ಲೆ?
ಕದಳಿಯ ಬನವ ನಿನ್ನಲ್ಲಿ ನೀನು ತಿಳಿದು ನೋಡು,
ಮದ ಮತ್ಸರ ಬೇಡ. ಹೊದಕುಳಿಗೊಳಬೇಡ.
ಗುಹೇಶ್ವರನೆಂಬ ಲಿಂಗವು ಕಲ್ಪಿತವಲ್ಲ ನಿಲ್ಲೊ./79
ಅಜ್ಞಾನ ಸುಜ್ಞಾನಗಳೆರಡೂ ಶಿವನೆಂದಡೆ
ಶಿವಜ್ಞಾನಿಗಳು ಮೆಚ್ಚುವರೆ ?
ಶಿವ ಶಕ್ತಿಗಳೆರಡೂ ನೀನೇ ಎಂದಡೆ
ಮಹಾನುಭಾವಿಗಳು ಪರಿಣಾಮಿಸುವರೆ ?
ತನ್ನ ತಾನಾರೆಂಬುದನರಿಯದೆ, ಅನ್ಯವೆಲ್ಲವೂ ಬೊಮ್ಮವೆಂಬ,
ಈ ಕರ್ಮದ ನುಡಿಯ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗವು ?/85
ಅಜ್ಞಾನವೆಂಬ ತೊಟ್ಟಿಲೊಳಗೆ, ಜ್ಞಾನವೆಂಬ ಶಿಶುವ ಮಲಗಿಸಿ,
ಸಕಲ ವೇದಶಾಸ್ತ್ರವೆಂಬ ನೇಣ ಕಟ್ಟಿ,
ಹಿಡಿದು ತೂಗಿ ಜೋಗುಳವಾಡುತ್ತಿದ್ದಾಳೆ ಭ್ರಾಂತಿಯೆಂಬ ತಾಯಿ !
ತೊಟ್ಟಿಲು ಮುರಿದು ನೇಣು ಹರಿದು, ಜೋಗುಳ ನಿಂದಲ್ಲದೆ,
ಗುಹೇಶ್ವರನೆಂಬ ಲಿಂಗವ ಕಾಣಬಾರದು/86
ಅಡಿಗಡಿಗೆ ತೊಳೆದು ಕುಡಿವಡೆ ಹೊಟ್ಟೆಯ ಜಲಗರಕುತ್ತ ಬೆಳೆಯಿತ್ತೆ ?
ಅಚ್ಚ ಪ್ರಸಾದಿಯಾದಡೆ ಹಿಂದೆ ಪರಿಯಾಣ ಉಳಿವುದೆ ?
ಇವರೆಲ್ಲರು ನಿಮ್ಮ ಪೂಜಿಸಿ ವ್ರತಗೇಡಿಗಳಾದರು.
ನಾ ನಿಮ್ಮ ಪೂಜಿಸಿ ಬದುಕಿದೆನು ಗುಹೇಶ್ವರಾ !/95
ಅತ್ತಲಿಂದ ಒಂದು ಪಶುವು ಬಂದು,
ಇತ್ತಲಿಂದ ಒಂದು ಪಶುವು ಬಂದು,
ಒಂದರ ಮೋರೆಯನೊಂದು ಮೂಸಿ ನೋಡಿದಂತೆ,
ಗುರುವು ಗುರುವಿನೊಳಗೆ ಸಂಬಂಧವಿಲ್ಲ ಶಿಷ್ಯರು ಶಿಷ್ಯರೊಳಗೆ ಸಂಬಂಧವಿಲ್ಲ,
ಭಕ್ತರಲಿ ಭಕ್ತರಲಿ ಸಂಬಂಧವಿಲ್ಲ.
ಈ ಕಲಿಯುಗದೊಳಗುಪದೇಶವ ಮಾಡುವ ಹಂದಿಗಳಿರಾ ನೀವು ಕೇಳಿರೊ,
ಗಂಡಗೆ ಗುರುವಾದಡೆ ಹೆಂಡತಿಗೆ ಮಾವನೆ ?
ಹೆಂಡತಿಗೆ ಗುರುವಾದಡೆ ಗಂಡಂಗೆ ಮಾವನೆ ?
ಗಂಡ ಹೆಂಡತಿಗೆ ಗುರುವಾದಡೆ ಇವರಿಬ್ಬರೇನು ಒಡಹುಟ್ಟಿದರೆ ?
ಈ ಭೇದವನರಿಯದೆ ದೀಕ್ಷೆ ಕಾರಣವ ಮಾಡುವಾತ ಗುರುವಲ್ಲ.
ಈ ಕಳೆಯ ಕುಲವನರಿಯದಾತ ಶಿಷ್ಯನಲ್ಲ.
ಈ ಭೇದವನರಿದು ಕಾರಣವ ಮಾಡುವ ಗುರುಶಿಷ್ಯ ಸಂಬಂಧವೆಲ್ಲ
ಉರಿ ಕರ್ಪುರ ಸಂಯೋಗದಂತಹುದು ಕಾಣಾ ಗುಹೇಶ್ವರಾ./99
ಅನಾದಿಗಣನಾಥನ ಶಿಷ್ಯನು ಆದಿಗಣನಾಥನು.
ಆದಿಗಣನಾಥನ ಶಿಷ್ಯನು ಅಧ್ಯಾತ್ಮಗಣನಾಥನು.
ಅಧ್ಯಾತ್ಮಗಣನಾಥನ ಶಿಷ್ಯನು ಆತ್ಮಗಣನಾಥನು.
ಆತ್ಮಗಣನಾಥನ ಶಿಷ್ಯನು ವ್ಯೋಮಸಿದ್ಧಗಣನಾಥನು
ವೋಮಸಿದ್ಧಗಣನಾಥನ ಶಿಷ್ಯನು ಬಸವನೆಂಬ ಗಣನಾಥನು.
ಬಸವನೆಂಬ ಗಣನಾಥನ ಶಿಷ್ಯನು ಅನಿಮಿಷನೆಂಬ ಗಣನಾಥನು.
ಅನಿಮಿಷನೆಂಬ ಗಣನಾಥನ ಶಿಷ್ಯನು ಅಲ್ಲಮಪ್ರಭುವೆಂಬ ಗಣನಾಥನು.
ಇಂತು ಅನಾದಿವಿಡಿದು ಬಂದ ಅನುಪಮಲಿಂಗವು,
ಗುಹೇಶ್ವರನೆಂಬ ಹೆಸರನೊಳಕೊಂಡು,
ಎನ್ನ ಕರಸ್ಥಲಕ್ಕೆ ಸಾಧ್ಯವಾಯಿತ್ತು ಕಾಣಾ ಸಿದ್ಧರಾಮಯ್ಯಾ./110
ಅನು ನೀನೆಂಬುದು ತಾನಿಲ್ಲ, ತಾನರಿದ ಬಳಿಕ ಏನೂ ಇಲ್ಲ ಇಲ್ಲ.
ಇಲ್ಲದ ಇಲ್ಲವೆ ಎಲ್ಲಿಂದ ಬಪ್ಪುದೊ?
ಅನುವರಿದು, ತನುವ ಮರೆದ ಭಾವರಹಿತ ಗುಹೇಶ್ವರ./115
ಅನ್ನವನಿಕ್ಕಿ ನನ್ನಿಯ ನುಡಿದು
ಅರವಟ್ಟಿಗೆಯನಿಕ್ಕಿ ಕೆರೆಯ ಕಟ್ಟಿಸಿದಡೆ
ಮರಣದಿಂದ ಮೇಲೆ ಸ್ವರ್ಗ ಉಂಟಲ್ಲದೆ
ಶಿವನ ನಿಜವು ಸಾಧ್ಯವಾಗದು.
ಗುಹೇಶ್ವರನನರಿದ ಶರಣಂಗೆ ಆವ ಫಲವೂ ಇಲ್ಲ/121
ಅಭ್ಯಾಸದ ಮಾತಲ್ಲ, ಶ್ರೋತ್ರದ ಸುಖವಲ್ಲ,
ಶಾಸ್ತ್ರದ ಅನುಭಾವದ ಮಾತಲ್ಲ.
ಒಳಗಣ ಮಾತಲ್ಲ ಹೊರಗಣ ಮಾತಲ್ಲ.
ಇದರಂಗ (ತು?) ವನರಿಯರೆ,
ಅನುಭಾವವ ಮಾಡಿ ಫಲವೇನಯ್ಯಾ ?
ಗುಹೇಶ್ವರಲಿಂಗವು ಉಪಮಾತೀತ ನೋಡಯ್ಯಾ ಸಿದ್ಧರಾಮಯ್ಯ !/125
ಅಭ್ಯಾಸವ ಮಾಡುವ ಕೋಲಿಂಗೆ ಶರಣೆಂದಡೆ
ಮುಂದಣ ಬವರಕ್ಕಾಗಬಲ್ಲುದೆ ಅಯ್ಯಾ ?
ಇಷ್ಟಲಿಂಗವೆಂದು ಮುಟ್ಟಿ ಪೂಜಿಸುತ್ತಿದ್ದಡೆ
ಮುಂದಣ ಶಂಕೆಗಿನ್ನೆಂತೊ ?
ಲಿಂಗವೆಂದಡೆ ನಿಸ್ಸಂಗದಲ್ಲಿದೆ,
ಜಂಗಮವೆಂದಡೆ ಆಶ್ರಯದಲ್ಲಿದೆ
ಈ ಲಿಂಗಜಂಗಮವನೊಂದೆಂದಡೆ ಮುಂದಣ ಲಯಕ್ಕಿನ್ನೆಂತೊ ?
ಎಲೆ ಗುಹೇಶ್ವರಾ,
ನಿಮ್ಮ ಶರಣ ಚತುರ್ವಿಧಪದವಿಗಳಿಗೆ ಹೊರಗು./126
ಅಯ್ಯ ! ನಾಟಕನಲ್ಲ ಬೂಟಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ.
ಶೀಲಿಗನಲ್ಲ ಕಪಟನಾಟಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ.
ರುಂಡಮಾಲಿಗನಲ್ಲ ಗುಂಡುಗಾಸಿಗನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ.
ಪುಲಿಚರ್ಮನಲ್ಲ ಗಜಚರ್ಮನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ.
ದಕ್ಷಾಧ್ವರಸಂಹರನಲ್ಲ ತ್ರಿಪುರಾರಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ.
ನಂದಿವಾಹನನಲ್ಲ ಭೃಂಗಿಸ್ತುತನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ.
ಸರ್ಪಧರನಲ್ಲ ಚಂದ್ರಶೇಖರನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ.
ಗಂಗಾಧರನಲ್ಲ ಗೌರಿಪ್ರಿಯನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ.
ಗಿರಿಜಾವಲ್ಲಭನಲ್ಲ ಪಾರ್ವತಿಪ್ರಿಯನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ.
ಯೋಗಿಯಲ್ಲ ಜೋಗಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ.
ಶ್ರವಣನಲ್ಲ ಸನ್ಯಾಸಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ.
ಕಾಳಾಮುಖಿಯಲ್ಲ ಪಾಶುಪತಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ.
ಇಂತು ಉಭಯವಳಿದ ಸಂಗನಬಸವಣ್ಣನ
ಸರ್ವಾಂಗದಿ ಬೆಳಗುವ ಮಹಾಜ್ಯೋತಿ ತಾನೆ ನೋಡ ! ಗುಹೇಶ್ವರಲಿಂಗವು
ಚೆನ್ನಬಸವಣ್ಣ./143
ಅಯ್ಯ ! ನಿರಾಳ ನಿಃಶೂನ್ಯ ಪರಮ ಭಕ್ತ-ಜಂಗಮ ತಾನಾಗಲರಿಯದೆ
ಬರಿದೆ ಅಹಂಕರಿಸಿ ಮುಂದುಗೊಂಡು ಮೂರು ಮಲಗಳ ಸ್ವೀಕರಿಸಿ,
ನಾವೆ ಭಕ್ತ-ಜಂಗಮವೆಂದು ನುಡಿವ ಕರ್ಮಕಾಂಡಿಗಳು
ಕಾಶಿ, ಕೇತಾರ, ಶ್ರೀಶೈಲ, ಗಯಾ, ಪ್ರಯಾಗ, ಶಿವಗಂಗೆ, ಕಂಚಿ,
ಕಾಳಹಸ್ತಿ, ಪಂಪಾಕ್ಷೇತ್ರ,
ವೀರಣ್ಣ, ಬಸವಣ್ಣ, ಕಲ್ಲಣ್ಣ, ಮಲ್ಲಣ್ಣ,
ಕಂಥೆ, ಕಮಂಡಲ, ಗದ್ದಿಗೆ, ಪಾವುಗೆ, ಭಸ್ಮ, ಘಂಟಿಕೆ, ಪುರಾಣ, ದಂಡಾಗ್ರ,
ಗಿಳಿಲು, ಶಂಖು,
ತಿಥಿ, ವಾರ, ನಕ್ಷತ್ರ, ಹುಣ್ಣಿವೆ, ಅಮಾವಾಸ್ಯೆ, ಸೂರ್ಯ, ಚಂದ್ರಾಗ್ನಿ, ದೀಪಾರತಿ
ಗಂಗೆ, ಗೌರಿ, ವಿಘ್ನೇಶ್ವರ ಮೊದಲಾದವು ಇವು ದೈವಂಗಳೆಂದು
ಕಲ್ಲು, ಮಣ್ಣು, ಮರದಿಂದ ರಚಿಸಿ, ಸಂದಿ-ಗೊಂದಿ-ಮಾಡು-
ಜಗುಲಿಯ ಮಾಡಿಟ್ಟು,
ಅದರ ತೊಳೆದ ನೀರು, ಎಂಜಲವ ತಿಂಬವರ ದೇವ-ಭಕ್ತರೆನಬಹುದೆ ?
ಇಂತಪ್ಪ ಅನಾಚಾರಿ ಶ್ವಪಚರ, ಭಕ್ತ-ಜಂಗಮ-ದೇವರೆಂದು ಪೂಜಿಸಲಾಗದು.
ನಿರಾಭಾರಿ ವೀರಶೈವಾಚಾರ ಕ್ರಿಯಾಜ್ಞಾನ ವೈರಾಗ್ಯ ಸದ್ಭಕ್ತಿಯುಳ್ಳ
ಸದ್ಭಕ್ತ ಶಿವಶರಣನ ಪೂಜಿಸಿ ಪಾದೋದಕ-ಪ್ರಸಾದವ ಕೊಂಡಡೆ
ಭವಪಾಶಕರ್ಮಂಗಳು ಮಾಣ್ಬವು ಕಾಣಾ ಗುಹೇಶ್ವರಲಿಂಗದಲ್ಲಿ
ಚೆನ್ನಬಸವಣ್ಣ./148
ಅರಿವು ಅರಿವು ಎನುತಿಪ್ಪಿರಿ, ಅರಿವು ಸಾಮಾನ್ಯವೆ ?
ಹಿಂದಣ ಹೆಜ್ಜೆಯ ನೋಡಿ ಕಂಡಲ್ಲದೆ
ನಿಂದ ಹೆಜ್ಜೆಯನರಿಯಬಾರದು.
ಮುಂದಣ ಹೆಜ್ಜೆಯಳಿದಲ್ಲದೆ, ಒಂದು ಪಾದ ನೆಲೆಗೊಳ್ಳದು.
ನೆಲನ ಬಿಟ್ಟು ಆಕಾಶದಲ್ಲಿ ನಿಂದು ಮುಗಿಲೊಳಗೆ ಮಿಂಚಿದಲ್ಲದೆ
ತಾನಾಗಬಾರದು.-ಗುಹೇಶ್ವರನೆಂಬುದು ಬರಿದೆ ಬಹುದೆ ಹೇಳಿರೆ ?/220
ಅಳಿವರ ಉಳಿವರ ಸುಳಿವರ ನಿಲವ ನೋಡಿ ಕಂಡು
ಸೋಂಕಿಲ್ಲದ ರೂಪಿಲ್ಲದ ನಿಜವ ಬಯಸುತ್ತಿದ್ದೆ,
ಕಾಲಿಲ್ಲದೆ ನಡೆಯುತ್ತಿದ್ದೆ, ಕಣ್ಣಿಲ್ಲದೆ ನೋಡುತ್ತಿದ್ದೆ ಗುಹೇಶ್ವರಾ./248
ಅಂತಪ್ಪ ಮಹಾಲಿಂಗವನು ಶರಣರನು ಅರಿಯದೆ
ಷಡುದೇವತೆಗಳು ಮುಖ್ಯವಾದ ಮನು ಮುನಿ ದೇವ ದಾನವ
ಮಾನವರೆಲ್ಲರೂ ಆರಿಸಿ ತೊಳಲಿ ಬಳಲುತ್ತಿಪ್ಪರು.
ಅದು ಹೇಗೆಂದಡೆ:
ಬ್ರಹ್ಮವೇದದಲ್ಲರಸುವನು.
ವಿಷ್ಣು ಪೂಜೆಯಲ್ಲರಸುವನು.
ರುದ್ರ ಜಪದಲ್ಲರಸುವನು.
ಈಶ್ವರ ನಿತ್ಯನೇಮದಲ್ಲರಸುವನು.
ಸದಾಶಿವನು ನಿತ್ಯ ಉಪಚಾರದಲ್ಲರಸುವನು.
ಸರ್ವಗತ ಶೂನ್ಯದಲ್ಲರಸುವನು.
ಗೌರಿ ತಪದಲ್ಲರಸುವಳು, ಗಂಗೆ ಉಗ್ರದಲ್ಲರಸುವಳು.
ಚಂದ್ರ ಸೂರ್ಯರು ಹರಿದರಸುವರು.
ಇಂದ್ರ ಮೊದಲಾದಷ್ಟದಿಕ್ಪಾಲಕರು ಆಗಮ್ಯದಲ್ಲರಸುವರು
ಸಪ್ತ ಮಾತೃಕೆಯರು `ಓಂ ಪಟು ಸ್ವಾಹಾ’ ಎಂಬ ಮಂತ್ರದಲ್ಲರಸುವರು.
ಸತ್ಯಋಷಿ ದದಿಚಿ ಗೌತಮ ವಶಿಷ್ಠ ವಾಲ್ಮೀಕಿ ಅಗಸ್ತ್ಯ ವಿಶ್ವಾಮಿತ್ರ
ಇವರು ಮೊದಲಾದ ಸಪ್ತಋಷಿಯರುಗಳೆಲ್ಲಾ
ತಪ, ಯೋಗ, ಆಗಮಂಗಳಲ್ಲಿ ಅರಸುವರು.
ಇಂತಿವರೆಲ್ಲರಿಗೆಯೂ ಸಿಕ್ಕಿಯೂ ಸಿಕ್ಕದ ಘನವು
ಶುಕ್ಲ ಶೋಣಿತವಿಲ್ಲದ ಕಾಮಿ, ಒಡಲಿಲ್ಲದ ರೂಪು,
ತಲೆಯಿಲ್ಲದ ಗಜ, ಬಾಲವಿಲ್ಲದ ಸಿಂಹ, ನಿದ್ರೆಯಿಲ್ಲದ ನಿರಾಳ.
ಇಂತೀ ಭೇದಮಂ ಭೇದಿಸಿ ನೋಡಬಲ್ಲಡೆ ಕಣ್ಣ ಮೇಲೆ ಕಣ್ಣುಂಟು.
ಮತ್ತಾ ಕಣ್ಣ ತೆರೆದು
ಅಮೃತಕಾಯದೃಷ್ಟಿಯಲ್ಲಿ ನೋಡಿದಡೊಂದೂಯಿಲ್ಲ.
ನಮ್ಮ ಗುಹೇಶ್ವರ ಲಿಂಗವು ಬಚ್ಚಬರಿಯ ಬಯಲು
ನಿಶ್ಚಿಂತ ನಿರಾಳನು/289
ಮರ್ತ್ಯಲೋಕದ ಭಕ್ತರುಗಳೆಲ್ಲರು, ತಥ್ಯವನರಿಯದೆ,
ಮಿಥ್ಯವನೆ ಹಿಡಿದು ಮಿಥ್ಯವನೆ ಪೂಜಿಸಿ ವ್ಯರ್ಥರಾಗಿ ಹೋದರು,
ತಮ್ಮ ತಾವರಿಯದೆ ಕೆಟ್ಟರು.
ಆರು ದರುಶನ ಅನಾಚಾರವ ನಡೆದವು,
ಸುರೆಯ ಕುಡಿದವು, ಮಾಂಸವ ತಿಂದವು.
ಆರು ದರುಶನಕ್ಕೆ ಅನಾಚಾರವಾದುದೆಂದು
ನಾನು ಗುರುವಾದೆ ಕಾಣಾ ಗುಹೇಶ್ವರಾ./342
ಗುರುಲಿಂಗ ವಿಷ್ಣುವಿಂಗೆ ಸಂಬಂಧ,
ಶಿವಲಿಂಗ ರುದ್ರಂಗೆ ಸಂಬಂಧ,
ಜಂಗಮಲಿಂಗ ಈಶ್ವರಂಗೆ ಸಂಬಂಧ,
ಪ್ರಸಾದಲಿಂಗ ಸದಾಶಿವಂಗೆ ಸಂಬಂಧ,
ಮಹಾಲಿಂಗ ಪರಶಿವಂಗೆ ಸಂಬಂಧ,
ಇಂತಾರುಲಿಂಗ ಆರುದರುಶನಕ್ಕೆ ಸಂಬಂಧ.
ನಿಮ್ಮ ಸಂಬಂಧವ ನೀವು ಬಲ್ಲಿರೆ ಹೇಳಿರೊ !/344
ಆರುಸ್ಥಲದಲ್ಲಿ ಅರಿತಿಹೆನೆಂದು
ಸಹಭೋಜನದಲ್ಲಿ ಉಂಬ ಅಣ್ಣಗಳು ನೀವು ಕೇಳಿರೊ !
ಅಂಗದ ಮೇಲೆ ಲಿಂಗಸಂಬಂದಿಯಾದಡೇನಯ್ಯ,
ಆ ಲಿಂಗವ ತನ್ನ ಪ್ರಾಣಕ್ಕೆ ಅವಧರಿಸದನ್ನಕ್ಕ !
ಆ ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರ
ಬಾಹ್ಯಕ್ರೀಯ ಮಾಡಿದಡೇನಯ್ಯ ನೈಷ್ಠೆಇಲ್ಲದನ್ನಕ್ಕ
ಅಷ್ಟಮದಂಗಳ ನಷ್ಟವಮಾಡಿ ಪಂಚೇಂದ್ರಿಯಂಗಳ ಲಿಂಗಮುಖವ ಮಾಡಿ
ದೇಹೇಂದ್ರಿಯ ಮನ ಪ್ರಾಣಾದಿಗಳ ಪ್ರಕೃತಿಯನಳಿದು !
ಇಷ್ಟ ಪ್ರಾಣ ಭಾವವೆಂಬ ತ್ರಿವಿಧ ಲಿಂಗಕ್ಕೆ
ರೂಪು ರುಚಿ ತೃಪ್ತಿಯನೀವ ವರ್ಮಾದಿವರ್ಮಂಗಳ ಭೇದವನರಿಯದೆ !
ಕರಸ್ಥಲದಲ್ಲಿ ಲಿಂಗವಿಡಿದು ಸಹಭೋಜನವೆಂದು ಒಂದಾಗಿ ಉಂಡು
ತಮ್ಮ ಒಡಲ ಹೊರೆವ ಲಿಂಗದ್ರೋಹಿಗಳ ನೋಡಿ ನಗುತ್ತಿರ್ದೆನಯ್ಯಾ
ಗುಹೇಶ್ವರಾ./345
ಇಂದು ನಾಳೆ ಮುಕ್ತಿಯ ಪಡೆವೆನೆಂಬ ಶಿಷ್ಯಂಗೆ
ಮುಂದಳ ಮುಕ್ತಿಯ ತೋರಿಹೆನೆಂಬ ಗುರುಗಳ ನೋಡಿರೆ !
ಹೋಮ, ನೇಮ, ಜಪ, ತಪಗಳ ಮಾಡಿ ತಾನುಂಡು
ಫಲವುಂಟೆಂದ ಗುರು ಹುಸಿದು ಸತ್ತ, ಶಿಷ್ಯ ಹಸಿದು ಸತ್ತ.
ಹಿಂದಣ ಕಥೆಯ ಹೇಳುವಾತ ಹೆಡ್ಡ, ಮುಂದಣ ಕಥೆಯ ಹೇಳುವಾತ ಮೂಢ,
ಇಂದಿನ ಘನವ ಹೇಳುವಾತನೆ ಹಿರಿಯನಯ್ಯಾ.
ತಾ ಹುಟ್ಟಿದಂದೆ ಯುಗಜುಗಂಗಳು ಹುಟ್ಟಿದವು, ತಾನಳಿದಲ್ಲೆ ಯುಗಜುಗಂಗಳಳಿದವು.
ಮಣ್ಣಿನ ಸಾರಾಯದಿಂದ ಮರನುತ್ಪತ್ಯ.
ಮರದ ಸಾರಾಯದಿಂದ ಎಲೆಯುತ್ಪತ್ಯ
ಎಲೆಯ ಸಾರಾಯದಿಂದ ಹೂವ ಉತ್ಪತ್ಯ
ಹೂವ ಸಾರಾಯದಿಂದ ಕಾಯಿ ಉತ್ಪತ್ಯ
ಕಾಯ ಸಾರಾಯದಿಂದ ಹಣ್ಣು ಉತ್ಪತ್ಯ
ಹಣ್ಣಿನ ಸಾರಾಯದಿಂದ ರುಚಿ ಉತ್ಪತ್ಯ
ರುಚಿಯಿಂದತ್ತ ಇಲ್ಲವೆಂಬ ತತ್ವ.
ಮಣ್ಣು ಮರನು ಅಳಿದ ಬಳಿಕ ಬೇರೆ ರುಚಿಯಿಪ್ಪಠಾವುಂಟೆ ?
ದೇಹವಳಿದ ಬಳಿಕ ಪ್ರಾಣವಿಪ್ಪುದಕ್ಕೆ ಠಾವುಂಟೆ ? ಇಲ್ಲವಾಗಿ;
ಇದು ಕಾರಣ, ಗುಹೇಶ್ವರನೆಂಬ ಲಿಂಗವ ಒಡಲು ವಿಡಿದು ಕಂಡೆ ಕಾಣಾ.
ಸಿದ್ಧರಾಮಯ್ಯ./361
ಇಷ್ಟಲಿಂಗವ ಪೂಜಿಸಿದರಾಗಿ ನಿಷ್ಠೆ ನೆಲೆಗೊಳ್ಳದು.
ಬಹುಲಿಂಗವ ಪೂಜಿಸಿ ಭ್ರಮಿತರಾದರು.
ಅನ್ಯಲಿಂಗವ ಪೂಜಿಸಿ ಬಿನ್ನರಾದರು.
ಸ್ಥಾವರ ಲಿಂಗವ ಪೂಜಿಸಿ ಸಾವಿಗೊಳಗಾದರು
ಬಳ್ಳ ಲಿಂಗವೆಂದು ಪೂಜಿಸಿ ಏನುವನರಿಯದೆ ಹೋದರು.
ಗುಹೇಶ್ವರನೆಂಬ ಲಿಂಗವ ಪೂಜಿಸಿ
ನಿಮ್ಮ ಶರಣರು ಅಲ್ಲಿಗಲ್ಲದೆ ಇಲ್ಲಿಗಲ್ಲದೆ ಹೋದರು ನೋಡಾ./394
ಊರದ ಚೇಳಿನ ಏರದ ಬೇನೆಯಲ್ಲಿ, ಮೂರುಲೋಕವೆಲ್ಲಾ ನರಳಿತ್ತು !
ಹುಟ್ಟದ ಗಿಡುವಿನ ಬಿಟ್ಟ ಎಲೆಯ ತಂದು ಮುಟ್ಟದೆ ಹೂಸಲು;
ಮಾಬುದು-ಗುಹೇಶ್ವರಾ/443
ಎಸೆಯದಿರು ಎಸೆಯದಿರು ಕಾಮಾ,
ನಿನ್ನ ಬಾಣ ಹುಸಿಯಲೇಕೊ?
ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ-ಇವು ಸಾಲದೆ ನಿನಗೆ ?
ಗುಹೇಶ್ವರಲಿಂಗದ ವಿರಹದಲ್ಲಿ ಬೆಂದವರ,
ಮರಳಿ ಸುಡಲುಂಟೆ ಮರುಳು ಕಾಮಾ ?/488
ಏನ ಕಂಡಡೇನಯ್ಯಾ, ತನ್ನ ಕಾಣದಾತ ಕುರುಡ.
ಏನ ಕೇಳಿದಡೇನಯ್ಯಾ ತನ್ನ ಕೇಳದಾತ ಕಿವುಡ.
ಏನ ಮಾತಾಡಿದಡೇನಯ್ಯಾ ತನ್ನ ಮಾತಾಡದಾತ ಮೂಕ.
ದಿಟದಿಂತ ತನ್ನ ತಾ ಕಾಣಬೇಕು, ದಿಟದಿಂದ ತನ್ನ ತಾ ಕೇಳಬೇಕು,
ದಿಟದಿಂದ ತನ್ನ ತಾ ಮಾತಾಡಬೇಕು.
ಇದೆ ತನ್ನ ನೆಲೆ, ಸ್ವಭೂಮಿ, ಸ್ವಸ್ವರೂಪು ಕಾಣಾ-ಗುಹೇಶ್ವರಾ/490
ಕಂಗಳ ಕರುಳ ಕೊಯ್ದವರ, ಮನದ ತಿರುಳ ಹುರಿದವರ,
ಮಾತಿನ ಮೊದಲ ಬಲ್ಲವರ; ಎನಗೊಮ್ಮೆ ತೋರಾ ಗುಹೇಶ್ವರಾ/548
ಕಣ್ಣಿಂಗೆ ಕಣ್ಣು, ಕಣ್ಣೊಳು ಕಣ್ಣು, ಕಣ್ಣೇ ನೇತ್ರ,
ನೇತ್ರವೆ ಸೂತ್ರ, ಸೂತ್ರವೆ ಲಿಂಗ, ಲಿಂಗವೆ ಗುಹ್ಯ.
ಗುಹ್ಯಕ್ಕೆ ಗುಹ್ಯ, ಗೋಪ್ಯಕ್ಕೆ ಗೋಪ್ಯ, ರಹಸ್ಯಕ್ಕೆ ರಹಸ್ಯ.
ಈ ನೇತ್ರಮಹಿಮೆಯ ಗುಹೇಶ್ವರ ಬಲ್ಲನಲ್ಲದೆ
ಕಣ್ಣುಗೆಟ್ಟಣ್ಣಗಳೆತ್ತ ಬಲ್ಲರು ನೋಡಯ್ಯ./574
ಕಣ್ಣಿನೊಳಗಣ ಕಸ, ಕಾಲೊಳಗಣ ಮುಳ್ಳು,
ಮನದೊಳಗಣ ಶಂಕೆ ಹರಿಯಿತ್ತು,
ಗುಹೇಶ್ವರನೆಂಬ ಭಾವ ನಿರಾಳವಾದಲ್ಲಿ !/575
ಕಬ್ಬಿನ ರಸದೊಳಗಣ ಮುತ್ತನೊಡೆದು ನೋಡಲು
ಹುಬ್ಬಿನ ಮೇಲಣ ನೀಲದ ಪ್ರಭೆಯ ನೋಡಾ !
ವಜ್ರದ ಚಂಡಿಕೆ (ಚಂದ್ರಿಕೆ?)ಯಲ್ಲಿ ಕಟ್ಟಿ ಆಳುವರು !
ಉಭಯ ಕವಿಗಳಿಗೆ ಅರಿಯಬಾರದು.
ಗುಹೇಶ್ವರನ ಸ್ವಾನುಭಾವಿಗಳಿಗಲ್ಲದೆ ತಿಳಿಯಬಾರದು. /583
ಕಾಯದಲ್ಲಿ ಕಾಯ ಸವೆದು,
ಪ್ರಾಣದಲ್ಲಿ ಪ್ರಾಣ ಸವೆದು-ನಿಶ್ಚಿಂತವಾದ ಬಳಿಕ
ಹಸಿವು-ತೃಷೆಗಳೆಂಬವು ಅಳಿದು ಹೋದವು ನೋಡಾ.
ಉಂಡಿಹೆನೆಂಬ ಬಯಕೆಯಿಲ್ಲ ಒಲ್ಲೆನೆಂಬ ವೈರಾಗ್ಯವಿಲ್ಲ.
ಇದು ಸ್ವಾನುಭಾವತೃಪ್ತಿಯೊಳಡಗಿತ್ತು.
ಇದು ಕಾರಣ-ನಮ್ಮ ಗುಹೇಶ್ವರಲಿಂಗಕ್ಕೆ
ಆರೋಗಣೆ ಇಲ್ಲ ಕಾಣಾ ಸಂಗನಬಸವಣ್ಣಾ./659
No comments:
Post a Comment